ತುಮಕೂರು: ಜಿಲ್ಲೆಯಲ್ಲಿ ವಿದ್ಯುತ್ ಶಾಕ್ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ-ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 560 ವಿದ್ಯುತ್ ಕಂಬಗಳು ಬಿದ್ದಿದ್ದು, ತಕ್ಷಣವೇ ಹಾನಿಗೊಳಗಾದ ಕಂಬಗಳನ್ನು ಬದಲಾಯಿಸುವಂತೆ ಸೂಚನೆ ಬೆಸ್ಕಾಂ ಅಧಿಕಾರಿಗಳಿಗೆ ನೀಡಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಹಾನಿಯಾದಲ್ಲಿ ಬೆಸ್ಕಾಂಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ 30 ರಿಂದ 40 ಮಿ.ಮೀ. ಮಳೆಯ ಸಾಧ್ಯತೆ ಇರುವುದರಿಂದ ಮುಂದಿನ 2 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಸಂದರ್ಭದಲ್ಲಿ ಅತ್ಯಾವಶ್ಯಕ ಸಂದರ್ಭ ಹೊರತುಪಡಿಸಿ ದೂರ ಪ್ರಯಾಣ ಮಾಡದೆ ಮನೆಯಲ್ಲೇ ಇರುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಖ್ಯವಾಗಿ ಮಕ್ಕಳ ಮತ್ತು ರೈತರ ಸುರಕ್ಷತೆಗೆ ವಿಶೇಷ ಎಚ್ಚರಿಕೆ ವಹಿಸಬೇಕೆಂದರು.
ಪ್ರಸಕ್ತ ಜನವರಿ 1 ರಿಂದ ಮೇ 1ರವರೆಗೆ 50 ಮಿ.ಮೀ. ಮಳೆಯ ನಿರೀಕ್ಷೆ ಹೊಂದಲಾಗಿತ್ತು. ಈಗಾಗಲೇ ಜಿಲ್ಲೆಯಲ್ಲಿ 100 ಮಿ.ಮೀ. ಮಳೆಯಾಗಿದ್ದು, ಕಳೆದ ಒಂದು ವಾರದಲ್ಲಿಯೇ 30 ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ತಾಲೂಕುವಾರು ಮಳೆ ವಿವರಗಳ ವರದಿ ಪ್ರಕಾರ ಕೊರಟಗೆರೆ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದರು.

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವರದಿಯನುಸಾರ ಮಳೆಯಿಂದ 6 ಎಕರೆ ಪ್ರದೇಶದಲ್ಲಿ ಅಡಿಕೆ, ತೆಂಗು ಬೆಳೆ ಹಾನಿ ಹಾಗೂ 2 ಜಾನುವಾರುಗಳ ಪ್ರಾಣ ಹಾನಿಯಾಗಿದ್ದು, ಸರ್ಕಾರ ನಿಗಧಿಪಡಿಸಿದಂತೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆಯಿಂದ ಉಂಟಾಗಬಹುದಾದ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸುವ ಸಲುವಾಗಿ ಸ್ಥಳೀಯ ಕಂದಾಯ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಮಳೆ ಹಾನಿ ವಿವರಗಳನ್ನು ತಕ್ಷಣವೇ ಅಂದಾಜಿಸಿ ಪರಿಹಾರ ಪೋರ್ಟಲ್ನಲ್ಲಿ ದಾಖಲಿಸಬೇಕೆಂದರು.
ಜಿಲ್ಲೆಯಲ್ಲಿ ಮುಂದಿನ 2 ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಕೆರೆ ಸುತ್ತ-ಮುತ್ತ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.