ಬೇಲೂರು, ಜೂನ್ 17: ಪಟ್ಟಣದಲ್ಲಿ ಜೂನ್ 30ರಂದು ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಪೂರ್ವಭಾವಿ ಸಭೆ ಇಂದು ನಡೆಯಿತು. ಸಭೆಯಲ್ಲಿ ಕ್ಷೇತ್ರದ ಶಾಸಕರು, ವಿವಿಧ ಸಂಸ್ಥೆಗಳ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿ, ಯಶಸ್ವಿಯಾದ ಕಾರ್ಯಕ್ರಮಕ್ಕಾಗಿ ಸಲಹೆ ಹಾಗೂ ಸಹಕಾರದ ಬಗ್ಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್, ಹಾಸನ ಜಿಲ್ಲಾ ಪಂಚಾಯತ್ನ ಮಾಜಿ ಅಧ್ಯಕ್ಷ ಚಂದ್ರೇಗೌಡ, ಎಚ್.ಡಿ.ಸಿ.ಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎಂ.ಎ. ನಾಗರಾಜ್, ಶಿಕ್ಷಣಾಧಿಕಾರಿ ರಾಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಹಾಗೂ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಕಾರ್ಯಕ್ರಮದ ಸ್ವರೂಪ, ಭಾಗವಹಿಸುವ ಗಣ್ಯರ ಮಾಹಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳ ಕಲ್ಪನೆ ಸೇರಿದಂತೆ ಹಲವು ಅಂಶಗಳನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.

ಅಂತಿಮ ಕಾರ್ಯಕ್ರಮದ ವೇಳಾಪಟ್ಟಿ ಹಾಗೂ ಆಹ್ವಾನಿತರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ. ಇದಲ್ಲದೇ, ಸ್ಥಳೀಯ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
- ನೂರ್ ಅಹಮ್ಮದ್