ತುಮಕೂರು: ರಾಜ್ಯದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್ಗೌಡರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿರುವುದು ಖಂಡನೀಯ.ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುತ್ತಿರುವ, ಬಡ ರೋಗಿಗಳಿಗೆ ಸಹಾಯವಾಗುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ಸೇವೆ ದುಬಾರಿಯಾಗಿ ಬಡವರು ಸಂಕಷ್ಟಪಡುತ್ತಿರುವ ಸಂದರ್ಭದಲ್ಲಿ ಮೋದಿ ಸರ್ಕಾರ ಬಡವರಿಗೆ ಕೈಗಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿ ದೊರಕಿಸಲು ಆರಂಭಿಸಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿಯಾಗಿದೆ.ಸಿಎಂ ಸಿದ್ದರಾಮಯ್ಯನವರು ಮೋದಿಯವರ ಜನಪರ ಯೋಜನೆಗಳನ್ನು ದ್ವೇಷ ಮಾಡಿಕೊಂಡು ರದ್ದು ಮಾಡಿ ರಾಜ್ಯದ ಜನರಿಗೆ ಅನ್ಯಾಯ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ.ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಅವರಿಗೆ ಬಡ ಜನರ ಆರೋಗ್ಯದ ಬಗ್ಗೆ ಕಾಳಜಿಯಿಲ್ಲ, ಕೂಡಲೇ ಜನೌಷಧಿ ಕೇಂದ್ರ ಮುಚ್ಚುವ ಆದೇಶ ಹಿಂಪಡೆಯಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಖಾಸಗಿ ಔಷಧಿ ಸಂಸ್ಥೆಗಳ ಒತ್ತಡಕ್ಕೆ ಮಣಿದು, ಇಲ್ಲವೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಬಡವರಿಗೆ ವಂಚನೆ ಮಾಡುತ್ತಿದೆ.ರಾಜ್ಯದಲ್ಲಿ ಸುಮಾರು 1500 ಜನೌಷಧಿ ಕೇಂದ್ರಗಳಲ್ಲಿ 12 ಲಕ್ಷ ಜನ ಕಡಿಮೆ ದರದಲ್ಲಿ ಔಷಧಿ ಖರೀದಿ ಮಾಡುತ್ತಿದ್ದಾರೆ. ಈಗ ಸರ್ಕಾರ ಏಕಾಏಕಿ ಜನೌಷಧಿ ಕೇಂದ್ರಗಳನ್ನು ಮುಚ್ಚುವುದರಿಂದ ಬಡವರು, ಆರ್ಥಿಕವಾಗಿ ಹಿಂದುಳಿದವರಿಗೆ ತೀವ್ರತೊಂದರೆಯಾಗುತ್ತದೆ ಎಂದು ಹೇಳಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಅವರು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಬಾರದು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ವಕ್ತಾರ ಹೆಚ್.ಎನ್.ಚಂದ್ರಶೇಖರ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಸಂದೀಪ್ಗೌಡ, ಧನುಷ್, ಹೆಚ್.ಎಂ.ರವೀಶಯ್ಯ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಪುಟ್ಟರಾಜು, ಬಂಬೂ ಮೋಹನ್, ಗಣೇಶ್ಪ್ರಸಾದ್, ಬನಶಂಕರಿಬಾಬು, ಮನೋಹರಗೌಡ, ಹನುಮಂತರಾಯಪ್ಪ, ಆಟೋಶಿವಕುಮಾರ್, ರಾಜಶೇಖರ್, ಮೊದಲಾದವರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
– ಕೆ.ಬಿ.ಚಂದ್ರಚೂಡ