ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಜನರು ಸರ್ಕಾರದ ಸೌಲಭ್ಯಗಳಿಂದ ಯಾವುದೇ ರೀತಿಯಲ್ಲೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಗೌ.ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದುವರೆಗೂ ಶೇ.94 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನು ಶೇ. 6 ರಷ್ಟು ಮಾತ್ರ ಬಾಕಿ ಇದೆ. ಮಳೆ ಹೆಚ್ಚಾಗಿರುವ ಕಾರಣದಿಂದ ಮಲೆನಾಡು ತಾಲ್ಲೂಕುಗಳಾದ ಮೂಡಿಗೆರೆ, ತರೀಕೆರೆ, ಕಳಸ, ಬಾಳೆಹೊನ್ನೂರು, ಚಿಕ್ಕಮಗಳೂರಿನಲ್ಲಿ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಮುಂದುವರಿದ ಭಾಗವಾಗಿ ನಡೆಯುತ್ತಿರುವ ಆನ್ಲೈನ್ ಸಮೀಕ್ಷೆಗೆ ನೆಟ್ವರ್ಕ್ ಸಮಸ್ಯೆಯಾಗುತ್ತಿರುವುದರಿಂದ ಸಮೀಕೆ ಕಾರ್ಯ ವಿಳಂಬವಾಗುತ್ತಿದೆ ಎಂದ ಅವರು, ಮಲೆನಾಡಿನ ಜನರಿಗೆ ಉಪಜಾತಿಯ ಬಗ್ಗೆ ಮಾಹಿತಿ ಕೊರತೆ ಇರುವುದರಿಂದ ತಾವುಗಳು ಉಪಜಾತಿಗಳ ಬಗ್ಗೆ ಮಾಹಿತಿ ಸರಿಯಾಗಿ ನೀಡಿ ಸಹಕರಿಸುವಂತೆ ತಿಳಿಸಿದರು. ಉಪಜಾತಿಗಳ ಉಲ್ಲೇಖ ಸಮಸ್ಯೆಯಿಂದ ಸಮೀಕ್ಷೆಗೆ ತೊಡಕಾಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.

ಸಮುದಾಯದ ಮುಖಂಡರು ಹಳ್ಳಿಗಳಲ್ಲಿ ಸಮೀಕ್ಷೆಯಾಗದಿರುವ ಮನೆಗಳನ್ನು ಗಮನಿಸಿ ಸಮೀಕ್ಷೆ ಮಾಡಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು. ಮನೆ ಮಂದಿ ಇಲ್ಲದಿರುವ ಸಂದರ್ಭದಲ್ಲಿ ಅಕ್ಕ-ಪಕ್ಕದವರು ಆ ಕುಟುಂಬದ ಜಾತಿ ಹಾಗೂ ಮೊಬೈಲ್ ಸಂಖ್ಯೆ ಮತ್ತಿತರೆ ಮಾಹಿತಿಯನ್ನು ಕೊಟ್ಟು ಸ್ಥಳೀಯರು ಸಹಕರಿಸುವಂತೆ ತಿಳಿಸಿದರು.
ಸಮೀಕ್ಷೆಗೆ ಎಲ್ಲ ಮುಖಂಡರ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಹಕರಿಸಿದಲ್ಲಿ ಈ ಸಮೀಕ್ಷೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬಹುದು ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಆರ್.ದೇವರಾಜ್, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ ಹಾಗೂ ಪರಿಶಿಷ್ಟ ಜಾತಿಯ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
–