ತುಮಕೂರು-ಹೇಮಾವತಿ ನಾಲೆಗೆ ನೀರು-ಕೃಷಿ ಚಟುವಟಿಕೆಗಳಿಗೆ ಬಳಸದಿರಲು ಡಿಸಿ ಸೂಚನೆ

ತುಮಕೂರು ಮೇ.29: ಹೇಮಾವತಿ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಜನ-ಜಾನುವಾರುಗಳ ಕುಡಿಯುವ ನೀರಿನ ಬೇಡಿಕೆಗನುಗುಣವಾಗಿ ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನಿಗಧಿತ ಪ್ರಮಾಣದಲ್ಲಿ ನಿಯಮಿತವಾಗಿ ಜಲಾಶಯದಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ.

ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ಪ್ರಮಾಣದಷ್ಟು ನೀರನ್ನು ಮಾತ್ರ ನಾಲೆ ಮೂಲಕ ಹರಿಸಲಾಗುತ್ತಿದ್ದು, ನಾಲೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ಕೃಷಿ ಚಟುವಟಿಕೆಗಳಿಗೆ ಹೇಮಾವತಿ ನೀರನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ.

ಜಲಾಶಯದಿಂದ ನೀರನ್ನು ಹರಿಸುವ ಅವಧಿಯು ತಾತ್ಕಾಲಿಕವಾಗಿದ್ದು, ಹೇಮಾವತಿ ಜಲಾನಯನ ಹಾಗೂ ಯೋಜನಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆಯ ಸ್ಥಿತಿ-ಗತಿಗಳನ್ನು ಅವಲೋಕಿಸಿ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸಲು ಅಗತ್ಯ ಕ್ರಮವಹಿಸಲಾಗುವುದು.

ಯೋಜನಾ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ನೀರು ಪೋಲಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಹೇಮಾವತಿ ನಾಲಾ ಯೋಜನಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಹಾಗೂ ರೈತರಿಗೆ ನೀರಿನ ಬಳಕೆ ಬಗ್ಗೆ ತಿಳುವಳಿಕೆ ನೀಡಬೇಕು.

ಅಪಾಯಕಾರಿಯಾಗಿ ಹರಿಯುವ ನಾಲೆ/ಹಳ್ಳ/ಕೆರೆ ದಡದಲ್ಲಿ ಹಾಗೂ ಹರಿಯುವ ನೀರಿನಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ತೊಳೆಯುವುದು, ಫೋಟೋ ಸೆಲ್ಫಿಗಳನ್ನು ತೆಗೆಯುವುದು, ನಾಲಾ ವ್ಯಾಪ್ತಿಯ ಸೇತುವೆಗಳ ಮೇಲೆ ಸಂಚರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಪೋಷಕರು ತಮ್ಮ ಮಕ್ಕಳನ್ನು ಹರಿಯುವ ನಾಲಾ ನೀರು ಮತ್ತು ಕೆರೆ-ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಾಲಾ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಹಾಗೂ ಅಚ್ಚುಕಟ್ಟುದಾರರು ಸುಗಮ ನೀರು ನಿರ್ವಹಣೆ ನಡೆಸುವ ನಿಟ್ಟಿನಲ್ಲಿ ನಿಯೋಜಿತ ಇಲಾಖಾಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ನೀರಿನ ದುರ್ಬಳಕೆ ಕಂಡು ಬಂದಲ್ಲಿ ದೂ.ವಾ.ಸಂ. 0816-2213400/ 155304/ ಮೊ.ಸಂ.7304975519ನ್ನು ಸಂಪರ್ಕಿಸುವ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *