ಹಾಸನ– ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗದ ವತಿಯಿಂದ ನಗರದ ಕೆಐಎಡಿಬಿ ಕಛೇರಿಯಲ್ಲಿ ಸ್ವಾವಲಂಬಿ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಫಲಾನುಭವಿಗಳಿಗೆ ವಿವಿಧ ಉಪಕರಣಗಳನ್ನು ಶಾಸಕ ಸ್ವರೂಪ್ ಪ್ರಕಾಶ್ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶಕ್ಕೆ ಈ ಭಾಗದ ಹಲವು ರೈತರು ತಮ್ಮ ಕೃಷಿ ಜಮೀನನ್ನು ಕಳೆದುಕೊಂಡು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಮಹಿಳೆಯರು ಕೂಡ ಇಂತಹ ಸಮಸ್ಯೆ ಎದುರಿಸುತ್ತಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಮಹಿಳೆಯರ ಸ್ವಯಂ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ ಎಂದರು.

ಮಹಿಳೆಯರ ಸ್ವಾವಲಂಬಿ ಬದುಕಿಗೆ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ, ಗ್ರಾಮ ಪಂಚಾಯಿತಿ ಹಂತದಲ್ಲಿ ಕೂಡ ಸ್ವಯಂ ಉದ್ಯೋಗಿನಿ ಜೊತೆಗೆ ವಿವಿಧ ಇಲಾಖೆಗಳಲ್ಲಿ ಕೂಡ ಹಲವು ಕಾರ್ಯಕ್ರಮಗಳು ಮಹಿಳೆಯರಿಗೆ ಮೀಸಲಿದ್ದು ಅವುಗಳನ್ನು ಅವರು ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಕೂಡ ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿ ಕೊಡಲು ಹಲವು ಯೋಜನೆಗಳು ಇವೆ, ಗಾರೆ ಉಪಕರಣಗಳು, ಮರಕೆಲಸದ ಉಪಕರಣಗಳು, ವಿದ್ಯುತ್ ಉಪಕರಣಗಳು ಸೇರಿದಂತೆ ವಿವಿಧ ಉಪಕರಣಗಳು ಲಭ್ಯವಿದೆ. ತಮ್ಮ ಇಚ್ಚೆಗೆ ಅನುಗುಣವಾಗಿ ತಮಗೆ ಇಷ್ಟವಾದ ಕ್ಷೇತ್ರ ದಲ್ಲಿ ಬದುಕು ಕಟ್ಟಿಕೊಳ್ಳಲು ಬೇಕಾದ ಸೌಲಭ್ಯಗಳನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.
ಈ ವೇಳೆ ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.