ತುಮಕೂರು- ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವಾಗಿ ಈ ಚುನಾವಣೆಗಳನ್ನು ನಡೆಸಬೇಕು ಎಂಬುದು ನನ್ನ ಮತ್ತು ನಮ್ಮ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಜೆಡಿಎಸ್-ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ರಾಜ್ಯದ ಹಿತಕ್ಕಾಗಿ ಈ ಹೊಂದಾಣಿಕೆ ಮುಂದುವರೆಯಲಿದೆ ಎಂದು ಅವರು ಹೇಳಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಹೇಮಾವತಿ ಜಲಾಶಯದಿಂದ ಮಂಡ್ಯ, ರಾಮನಗರ, ಹಾಸನ, ತುಮಕೂರು ಈ ಎಲ್ಲ ಜಿಲ್ಲೆಗಳ ರೈತರು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದುವರೆಗೂ ರೈತರ ಸಭೆ ಕರೆದು ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.

ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕುಮಾರಣ್ಣನವರ ಕಾಲಘಟ್ಟದಲ್ಲಿ ಈ ರೀತಿ ಘಟನೆ ನಡೆದಿದ್ದರೆ ಅವರು ರೈತರನ್ನು ಕೂರಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಡಿಸಿಎಂ ಡಿಕೆಶಿ ಅವರು ಹೇಳಿದಂತೆ ನಮ್ಮ ಪಕ್ಷದ ಯಾವೊಬ್ಬ ಶಾಸಕರು ಆ ಪಕ್ಷಕ್ಕೆ ಹೋಗುವ ಮನಸ್ಥಿತಿ ಹೊಂದಿಲ್ಲ. ಡಿಕೆಶಿ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದರು.
ಜಿಲ್ಲೆಯಿಂದ ಹೇಮಾವತಿ ನೀರನ್ನು ಉಪಮುಖ್ಯಮಂತ್ರಿಗಳು ಅವರ ಕ್ಷೇತ್ರಗಳಿಗೆ ಕೊಂಡೊಯ್ಯಲು ವಾಮಮಾರ್ಗ ಅನುಸರಿಸುತ್ತಿದ್ದಾರೆ. ಮೊದಲಿನಿಂದಲೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸುತ್ತಲೇ ಬಂದಿದ್ದೇವೆ. ಯಾವುದೇ ಕಾರಣಕ್ಕೂ ಈ ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದರು.

ಹೇಮಾವತಿ ನೀರನ್ನು ಮೊದಲು ನಾಲೆಯ ಕೊನೆಯ ಭಾಗಕ್ಕೆ ಹರಿಸಬೇಕು. ಆ ನಂತರ ಬೇರೆ ಕಡೆ ಕೊಂಡೊಯ್ಯಬೇಕು. ಈ ಕೆಲಸವನ್ನು ಹೇಮಾವತಿ ನಾಲಾ ವಲಯದ ಅಧಿಕಾರಿಗಳು ಮಾಡಲಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಿಪಟೂರು ಮುಖಂಡರಾದ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಟಿ.ಆರ್. ಆಂಜಿನಪ್ಪ,ಹೆಚ್.ನಿಂಗಪ್ಪ, ಕಾರ್ಯಾಧ್ಯಕ್ಷರಾದ ಟಿ.ಆರ್.ನಾಗರಾಜು, ಮಾಜಿ ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ, ಮಾಜಿ ಪಾಲಿಕೆ ಸದಸ್ಯರಾದ ಎ.ಶ್ರೀನಿವಾಸ್, ಕುಂಭಣ್ಣ, ಮತ್ತಿತರರು ಉಪಸ್ಥಿತರಿದ್ದರು.
- ಕೆ.ಬಿ.ಚಂದ್ರಚೂಡ