ಕೆ.ಆರ್.ಪೇಟೆ.ಮೇ.29: ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸಾಧನೆ ಮಾಡಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯದ ಮೂಲಕ ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.
ಅವರು ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಂಭ್ರಮ – 2025 ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.

ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಸತತವಾದ ಪರಿಶ್ರಮದಿಂದ ಅಭ್ಯಾಸ ಮಾಡಿ ಜಾಗತಿಕ ಸವಾಲುಗಳನ್ನು ತಮ್ಮ ತಾಂತ್ರಿಕ ಕೌಶಲ್ಯದ ಮೂಲಕ ಎದುರಿಸಿ ಸಾಧನೆ ಮಾಡಿ ಸುಭದ್ರವಾದ ಸಶಕ್ತ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಮಂಜು ಕರೆ ನೀಡಿದರು.

ತಾಂತ್ರಿಕ ಶಿಕ್ಷಣ ಪಡೆದವರಿಗೆಲ್ಲಾ ಸರ್ಕಾರಿ ಉದ್ಯೋಗ ದೊರೆಯುವುದಿಲ್ಲ ಎಂಬ ಸತ್ಯವನ್ನು ಅರಿತು ಭವಿಷ್ಯದ ಎಂಜಿನಿಯರುಗಳಾದ ವಿದ್ಯಾರ್ಥಿಗಳು ಗುಡಿ ಕೈಗಾರಿಕೆ ಗಳನ್ನು ಸ್ಥಾಪಿಸಿ ಸ್ವಯಂ ಉದ್ಯೋಗಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡುವ ಶಕ್ತಿಯನ್ನು ಬೆಳೆಸಿಕೊಂಡು ಸಾಧಕರಾಗಿ ಹೊರ ಹೊಮ್ಮಬೇಕು ಎಂದು ಶಾಸಕ ಮಂಜು ಕರೆ ನೀಡಿದರು.ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಆರ್.ದಿನೇಶ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ವಿಭಾಗಗಳ ಮುಖ್ಯಸ್ಥ ರಾದ ಮಂಜುನಾಥ ಉಪಾಧ್ಯ, ಡಾ.ನಾಗಪ್ಪ ಭಜಂತ್ರಿ, ಡಾ. ಅರುಣ್ ಕುಮಾರ್, ಡಾ.ರುದ್ರೇಶ್, ನಂದೀಶ್, ಡಾ. ಶಶಿಕಲಾ, ಡಾ.ಪ್ರಶಾಂತ್, ಡಿಂಕಾ ಮಹೇಶ್, ಸಮಾಜ ಸೇವಕ ಆರ್.ಟಿ.ಓ. ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- ಶ್ರೀನಿವಾಸ್ ಆರ್.