ಕೊರಟಗೆರೆ:-ತಾಲ್ಲೂಕಿನಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿದ್ದು, ರೈತರುಗಳು ಬಿತ್ತನೆಗೆ ರಸಗೊಬ್ಬರಗಳ ಮೊರೆಹೋಗುತ್ತಿರುವ ಹಿನ್ನಲೆಯಲ್ಲಿ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕ ಸ್ವಾಭವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಕ ಸಸ್ಯಗಳಿಗೆ ಲಭ್ಯವಾಗಿರುತ್ತದೆ.
ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಶ್ ಹೆಚ್ಚಿನ ಪ್ರಮಾಣಗಳಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಷಿಯಂ, ಮೆಗ್ನೇಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಟಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘುಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ಆದ್ದರಿಂದ ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶಗಳ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿದ್ದು. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ(ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಶ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ: ರಂಜಕ ಪೊಟ್ಯಾಶ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಶ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ.

ಅಲ್ಲದೇ ರೈತರು ರಸಗೊಬ್ಬರಗಳನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಶ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:24, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಕರಾದ ರುದ್ರಪ್ಪ ಎಂ.ಆರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರಟಗೆರೆ ತಾಲೂಕಿನಲ್ಲಿ ಇರುವ ಪ್ರತಿ ರಸಗೊಬ್ಬರ ಮಳಿಗೆ ಮಾರಾಟಗಾರರು ರಸಗೊಬ್ಬರಗಳನ್ನು ಮಾರಾಟ ಮಾಡುವಾಗ ರೈತರಿಗೆ ಪೊಟ್ಯಾಶ್ಯುಕ್ತ ಸಂಯುಕ್ತ ರಸಗೊಬ್ಬರಗಳ ಉಪಯುಕ್ತತೆ ಬಗ್ಗೆ ಪ್ರತಿ ರೈತರಿಗೆ ವಿವರವಾಗಿ ಮಾಹಿತಿಯನ್ನು ಒದಗಿಸಬೇಕು. ಮತ್ತು ಯಾವ ಬೆಳೆಗೆ ಯಾವ ಗೊಬ್ಬರ ಹಾಗೂ ಎಷ್ಟು ಪ್ರಮಾಣದಲ್ಲಿ ಹಾಕಬೇಕು ಎಂದು ತಿಳಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
- ಎಂ.ಆರ್.ರುದ್ರಪ್ಪ
ಕೃಷಿ ಸಹಾಯಕ ನಿರ್ದೇಶಕ
ಕೊರಟಗೆರೆ ತಾಲ್ಲೂಕು
–ಶ್ರೀನಿವಾಸ್, ಕೊರಟಗೆರೆ.