ಮಂಡ್ಯ-ಹಾವು ಮತ್ತು ನಾಯಿ ಕಡಿತದ ಚುಚ್ಚುಮದ್ದು ದಾಸ್ತಾನು ಪರಿಶೀಲಿಸಿ- ಡಾ: ಕುಮಾರ

ಮಂಡ್ಯ.ಜೂ.03 :- ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಸಂಬಂಧಿಸಿದ ಚುಚ್ಚುಮದ್ದು ಅಥವಾ ಔಷಧಿಗಳ ದಾಸ್ತಾನು ಸದಾ ಇರುವಂತೆ ಆಯಾ ಆರೋಗ್ಯ ಕೇಂದ್ರದ ಮುಖ್ಯಸ್ಥರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಮಿಮ್ಸ್ ಗೆ ನಾಯಿ ಕಡಿತಕ್ಲೆ ಔಷಧಿ ತೆರಳುವ ಸಂದರ್ಭದಲ್ಲಿ ಬಾಲಕಿ ಅಪಘಾತದಲ್ಲಿ ಮೃತಪಟ್ಟಿದೆ. ಬಾಲಕಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿದ್ದರೆ ಈ ಅಪಘಾತ ಸಂಭವಿಸುತ್ತಿರಲಿಲ್ಲ.

 ತುರ್ತು ಸಂದರ್ಭಗಳಲ್ಲಿ ಬೇಕಿರುವ ಔಷಧಿಗಳು ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇರಬೇಕು. ಇದನ್ನು ಪರಿಶೀಲಿಸಲು ಆಯಾ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಅವರುಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕೆಂದರು.

ಔಷಧಿಗಳ ದಾಸ್ತಾನು ಕುರಿತು ಮೊಬೈಲ್ ನಲ್ಲೇ ವೈದ್ಯರು ಮಾಹಿತಿ ಪಡೆಯಬಹುದು. ತಂತ್ರಜ್ಞಾನ ವನ್ನು ಹೆಚ್ಚು ಬಳಸಿಕೊಳ್ಳಿ. ಪ್ರತಿ ಜೀವವು ಅಮೂಲ್ಯ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಿದರು.

ಮಳೆಗಾಲ ಪ್ರಾರಂಭವಾಗಿದ್ದು, ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಕಟ್ಟಡಗಳ ನಿರ್ಮಾಣ ಸ್ಥಳಗಳಲ್ಲಿ ಹೆಚ್ಚು ನೀರು ನಿಲ್ಲುವ ಸಾಧ್ಯತೆ ಇರುತ್ತದೆ. ಇಂತಹ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದರು.

ಜಿಲ್ಲೆಯಲ್ಲಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಮಿಮ್ಸ್ ನಲ್ಲಿ ಎಸ್.ಎ.ಆರ್.ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಎಸ್.ಎ.ಆರ್.ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದರು.

ಜಿಲ್ಲೆಯಲ್ಲಿ ಸಾಂಕ್ರಮಿಕ ರೋಗವಲ್ಲದ ಮಧುಮೇಹ, ರಕ್ತದ ಒತ್ತಡ ಹಾಗೂ ಕ್ಯಾನ್ಸರ್ ರೋಗಗಳ ಪತ್ತೆ ಹಚ್ಚಿ ಅವರಿಗೆ ಚಿಕಿತ್ಸೆ ನೀಡಲು ಎನ್.ಸಿ.ಡಿ ಸ್ಕ್ರೀನಿಂಗ್ ನಡೆಸುತ್ತಿರುವುದು ಸರಿಯಷ್ಠೆ ಆದರೆ ಮಧುಮೇಹ, ರಕ್ತದ ಒತ್ತಡ ಹಾಗೂ ಕ್ಯಾನ್ಸರ್ ರೋಗಿಗಳ ಸಂಖ್ಯೆ ಎಷ್ಟು ಅವರು ಚಿಕಿತ್ಸೆಗೆ ಒಳಪಡೆಯುತ್ತಿದ್ದರ ಎಂದು ಪರಿಶೀಲಿಸಬೇಕು. ಹೆಚ್ಚಿನ ರೋಗಿಗಳು ಇರಿವ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹೆಚ್ಚು ಆಯೋಜಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಹೃದಾಯಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚು, ಈ ಕುರಿತಂತೆ ವಯೋಮಿತಿವಾರು ಸಮೀಕ್ಷೆ ನಡೆಸಿ. ಹೃದಯ ವೈಶಲ್ಯ ಯೋಜನೆಯಡಿ ಎಷ್ಟು ಜನರ ಸ್ಕ್ರೀನಿಂಗ್ ನಡೆಯುತ್ತಿದೆ. ಹೃದಯ ಸಂಬಂಧಿ ಖಾಯಿಲೆ ಇದ್ದಲ್ಲಿ ಮುಂದಿನ ಚಿಕಿತ್ಸೆಗೆ ರೆಫರ್ ಮಾಡುತ್ತಿರುವ ಬಗ್ಗೆ ವರದಿ ನೀಡಿದರು.

ಸಭೆಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ತಾಯಿ ಮರಣ ವರದಿಯನ್ನು ಪರಿಶೀಲಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ -2 ಟಿ.ಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಕೆ. ಮೋಹನ್, ಆರ್. ಸಿ. ಹೆಚ್. ಅಧಿಕಾರಿ ಡಾ.ಕೆ.ಪಿ. ಅಶ್ವಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕುಮಾರ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಂ. ಎನ್. ಆಶಾಲತಾ, ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಟಿ.ಎನ್ ಮರೀಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *