ತುಮಕೂರು : ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಹಾಗೂ ಮತ್ತಿತರ ಸ್ಥಿತಿ-ಗತಿಗಳ ಬಗ್ಗೆ ಸಮಗ್ರ ದತ್ತಾಂಶವನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ಮನೆ-ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಂದ ನಿಖರ ಮಾಹಿತಿಯನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಸಮೀಕ್ಷೆಗೆ ಸಂಬಂಧಿಸಿದಂತೆ ನಗರದ ಬಾಲಭವನದಲ್ಲಿ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ಗಳಿಗಾಗಿ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮೀಕ್ಷಾ ಕಾರ್ಯವು ಯಾವುದೇ ಲೋಪದೋಷಗಳಿಲ್ಲದೆ, ನೈಜ ಮಾಹಿತಿಯನ್ನು ಒಳಗೊಂಡಿರಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿ ಮಾಡಲು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನೇಮಿಸಿರುವ ಏಕವ್ಯಕ್ತಿ ವಿಚಾರಣಾ ಆಯೋಗದ ಉದ್ದೇಶದಂತೆ ಪರಿಶಿಷ್ಟ ಜಾತಿಗಳ ಸ್ಥಿತಿ-ಗತಿಗಳ ಬಗ್ಗೆ ವೈಜ್ಞಾನಿಕ ಮತ್ತು ವಾಸ್ತವಿಕ ಮಾಹಿತಿ ಪಡೆದುಕೊಂಡು ಒಳ ಮೀಸಲಾತಿಯನ್ನು ವರ್ಗೀಕರಿಸಿ ಸರ್ಕಾರಕ್ಕೆ ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಒಳ ಮೀಸಲಾತಿಯು ಪರಿಶಿಷ್ಟ ಜಾತಿಯಲ್ಲಿನ ಅತ್ಯಂತ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ಉದ್ದೇಶವನ್ನು ಹೊಂದಿದ್ದು, ಸಮೀಕ್ಷೆಯಲ್ಲಿ ಮಾಹಿತಿ ಸಂಗ್ರಹಿಸುವಾಗ ಯಾವುದೇ ರೀತಿಯ ತಪ್ಪು ಮಾಹಿತಿ ಅಥವಾ ನಿರ್ಲಕ್ಷö್ಯ ತೋರಬಾರದು ಎಂದು ತಿಳಿಸಿದರಲ್ಲದೆ ಮಾಸ್ಟರ್ ಟ್ರೆöÊನರ್ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಸಮೀಕ್ಷಾ ಕಾರ್ಯದ ಮೇಲ್ವಿಚಾರಕರು ಹಾಗೂ ಸಮೀಕ್ಷೆದಾರರಿಗೆ ಸೂಕ್ತ ತರಬೇತಿ ನೀಡಬೇಕು. ಸಮೀಕ್ಷೆ ನಡೆಸುವ ನಗರ/ಗ್ರಾಮದ ನಿವಾಸಿಗಳಿಗೆ ಮುಂಚಿತವಾಗಿಯೇ ಮನೆ-ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಬಗ್ಗೆ ತಿಳಿಸಬೇಕು. ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬದ ಎಲ್ಲಾ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಬೇಕೆಂದರು.

ಮಾಹಿತಿಯನ್ನು ಕುಟುಂಬಕ್ಕೆ ಸೇರದ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳ ಮೂಲಕ ಸಂಗ್ರಹಿಸಬಾರದು. ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ಮಾಹಿತಿ ಪಡೆಯಬಾರದು. ಸಮೀಕ್ಷೆ ವೇಳೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಗ್ವಾದ ಮಾಡದೆ ವಿನಯಪೂರ್ವಕವಾಗಿ ಪ್ರಶ್ನೆಯನ್ನು ಕೇಳಿ ಮಾಹಿತಿ ಸಂಗ್ರಹಿಸಬೇಕು.
ಸಮೀಕ್ಷೆದಾರರು ಮನೆ-ಮನೆ ಭೇಟಿ ನೀಡುವ ಸಂದರ್ಭದಲ್ಲಿ ಗುರುತಿನ ಚೀಟಿಯನ್ನು ಪ್ರದರ್ಶಿಸಬೇಕು. ಸಮೀಕ್ಷಾದಾರರು ತರಬೇತಿಗಳಿಗೆ ಹಾಜರಾಗಿ ಪ್ರಶ್ನಾವಳಿ ಮತ್ತು ಕೈಪಿಡಿಯನ್ನು ಅಧ್ಯಯನ ಮಾಡಬೇಕು. ಕೈಪಿಡಿಯಲ್ಲಿ ಸೂಚಿಸಿರುವ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಸೂಚಿಸಿದರಲ್ಲದೆ, ವಸತಿ ನಿಲಯ, ಹೋಟೆಲ್, ಪೇಯಿಂಗ್ ಗೆಸ್ಟ್, ಶಿಕ್ಷಣ, ಉದ್ಯೋಗ ತರಬೇತಿ ಉದ್ದೇಶಗಳಿಗಾಗಿ ತಾತ್ಕಾಲಿಕವಾಗಿ ವಾಸವಾಗಿರುವವರನ್ನು ಸಮೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲ. ಸಮೀಕ್ಷೆಗೆ ವಹಿಸಲಾದ ಸರಹದ್ದುಗಳನ್ನು ಖಚಿತಪಡಿಸಿಕೊಂಡು ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ತಪ್ಪಿಹೋಗದಂತೆ ಜಾಗರೂಕತೆಯಿಂದ ಸಮೀಕ್ಷೆಯನ್ನು ಕೈಗೊಳ್ಳಬೇಕೆಂದು ಅವರು ನಿರ್ದೇಶಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿ ಸಮೀಕ್ಷಾ ಕಾರ್ಯಕ್ಕಾಗಿ ಜಿಲ್ಲೆಯ 6 ಮಂದಿಗೆ ಈಗಾಗಲೇ ರಾಜ್ಯ ಮಟ್ಟದ ತರಬೇತಿ ನೀಡಲಾಗಿದೆ. ರಾಜ್ಯ ಮಟ್ಟದಲ್ಲಿ ತರಬೇತಿ ಹೊಂದಿದ ಮಾಸ್ಟರ್ ಟ್ರೈನರ್ಗಳು ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರದಲ್ಲಿ ತರಬೇತಿ ನೀಡಲಿದ್ದಾರೆ. ತರಬೇತಿಯಲ್ಲಿ ತಿಳಿಸಿದಂತೆ ದತ್ತಾಂಶಗಳನ್ನು ಸಂಗ್ರಹಸಬೇಕು. ದತ್ತಾಂಶ ಸಂಗ್ರಹಕ್ಕಾಗಿ ಮನೆ-ಮನೆಗೆ ಭೇಟಿ ನೀಡುವ ಸಮೀಕ್ಷೆದಾರರಿಗೆ ಕುಟುಂಬ ಸದಸ್ಯರು ನಿಖರ ಮಾಹಿತಿ ನೀಡುವ ಮೂಲಕ ಸಮೀಕ್ಷಾ ಕಾರ್ಯದ ಯಶಸ್ವಿಗೆ ಸಹಕರಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತುಮಕೂರು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್, ಮಧುಗಿರಿ ಉಪ ನಿರ್ದೇಶಕರಾದ ಗಿರಿಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕ ವೃಂದದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.